ನವ ದೆಹಲಿ: ಮುಂಬರುವ ರಾಜ್ಯಸಭಾ ಮತ್ತು ವಿಧಾನ ಪರಿಷತ್ ಚುನಾವಣೆಗಳಿಗೆ ಸಂಬಂಧಿಸಿದಂತೆ ಚರ್ಚೆಗಳು ನಡೆದಿದೆ. ಬೇರೆ ಯಾವ ವಿಷಯಗಳ ಬಗ್ಗೆಯೂ ಚರ್ಚೆ ನಡೆದಿಲ್ಲ ಎಂದು ಕರ್ನಾಟಕ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಯಾವುದೇ ಊಹಾಪೂಹಗಳಿಗೆ ಅವಕಾಶ ನೀಡಬಾರದು ಎಂದರು.
ನಾಯಕತ್ವ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಆಗಿಲ್ಲ.
ರಾಜ್ಯಸಭಾ ಮತ್ತು ವಿಧಾನ ಪರಿಷತ್ ಚುನಾವಣೆಗಳ ಕುರಿತು ಚರ್ಚೆ ನಡೆದಿದೆ.
ರಾಜ್ಯ ಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸುತ್ತೇವೆ. ನಾಯಕತ್ವ ಬದಲಾವಣೆ ಕೇವಲ ವದಂತಿ
– ಕೆ.ಸಿ.ವೇಣುಗೋಪಾಲ್
ಬೆಳಗ್ಗೆಯಿಂದ ನಿರಂತರವಾಗಿ ಸಭೆಯ ಮೇಲೆ ಸಭೆ ನಡೆಸಿದ ಎಐಸಿಸಿ ನಾಯಕರು ಅಂತಿಮವಾಗಿ ನಾಯಕತ್ವ ಬದಲಾವಣೆ ಚರ್ಚೆ ಬಗ್ಗೆ ಸಣ್ಣ ಸುಳಿವೂ ಸಹ ನೀಡದೆ ಮಾಧ್ಯಮಗಳ ಪ್ರಶ್ನೆಯಿಂದ ನುಣುಚಿಕೊಂಡಿದ್ದಾರೆ. ಕುರ್ಚಿ ಕಚ್ಚಾಟದ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂಬ ಸಂದೇಶ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ಸೇಫ್ ಎಂಬ ಸಂದೇಶ ನೀಡಿದ್ದಾರೆ.


