ಬೆಂಗಳೂರು : ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಯಾವ ಕ್ಷಣದಲ್ಲಾದರೂ ಚುನಾವಣೆ ನಡೆಯಬಹುದು. ಚುನಾವಣೆಗಳು ಯಾವ ಸಂದರ್ಭದಲ್ಲಿ ನಡೆದರೂ ಬಿಜೆಪಿ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರಲಿದೆ ಎಂದು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.
ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಬಿಜೆಪಿ 140 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದರು.
ಅತ್ಯಾಧಿಕ ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಜನರ ನಿರೀಕ್ಷೆಯನ್ನು ಹುಸಿ ಮಾಡಿದೆ. ರೈತರ ಸಮಸ್ಯೆಗಳಿಗೆ ಕಿಂಚಿತ್ತೂ ಗಮನ ಕೊಡುತ್ತಿಲ್ಲ. ಅಧಿಕಾರದ ದರ್ಪದಿಂದ ನಾಯಕರು ವರ್ತಿಸುತ್ತಿದ್ದಾರೆ. ಜನರು ಕಾಂಗ್ರೆಸ್ ಹೆಚ್ಚು ಸ್ಥಾನ ನೀಡಿದ್ದರೂ, ಆಂತರಿಕ ಕಚ್ಚಾಟದಿಂದ ಅಭಿವೃದ್ಧಿ ಕಾರ್ಯವನ್ನು ಮರೆತಿದ್ದಾರೆ. ಈ ಎಲ್ಲ ಕಾರಣಕ್ಕೆ ಮುಂದಿನ ಬಾರಿ ಬಿಜೆಪಿ ಸ್ವತಂತ್ರವಾಗಿ ಅಧಿಕಾರ ಹಿಡಿಯುವುದು ನಿಶ್ಚಿತ ಎಂದು ನುಡಿದರು.


