ಮೈಸೂರು: ಮೈಸೂರು ಒಡೆಯುರು ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ನಗರದ ಅರಮನೆ ಆವರಣದಲ್ಲಿ ಸೋಮವಾರ ಅರಮನೆ ವೇದಿಕೆಯಲ್ಲಿ ಆಯೋಜಿಸಿದ್ದ, ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2025ರ ದಸರಾ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದ ಮುಖ್ಯಮಂತ್ರಿಯಾಗಿ 8 ಬಾರಿ ದಸರಾ ಕಾರ್ಯಕ್ರಮವನ್ನು ಆಚರಣೆ ಮಾಡಿದ್ದೇನೆ. ಇದು ನನಗೆ ದೊರೆತ ಪುಣ್ಯ, ದಸರಾ ಮಹೋತ್ಸವಕ್ಕೆ ನಾಲ್ಕು ನೂರ ವರ್ಷಗಳ ಇತಿಹಾಸ ಇದೆ, 1610 ರಲ್ಲಿ ವಿಜಯನಗರ ಸಾಮ್ರಾಜ್ಯ ಪ್ರಾರಂಭವಾಯಿತು, ಅದರ ಪತನದ ನಂತರ ಶ್ರೀರಂಗಪಟ್ಟಣದಲ್ಲಿ ಪ್ರಾರಂಭಿಸಿ, ನಂತರ ಮೈಸೂರು ಒಡೆಯರು ಮೈಸೂರಿನಲ್ಲಿ ಪ್ರಾರಂಭಿಸಿದರು. ನಂತರ ಸರ್ಕಾರದಿಂದ ಆಚರಿಸಲಾಗುತ್ತಿದೆ ಎಂದರು.
ವಿಧಾನ ಪರಿಷತ್ ಸಭಾಧ್ಯಕ್ಷರಾದ ಬಸವರಾಜ ಹೊರಟ್ಟಿ ಮಾತನಾಡಿ, ರಾಜ್ಯದ ಐತಿಹಾಸಿಕ ಶ್ರೀಮಂತ ಪರಂಪರೆ ದಸರಾ, ಕನ್ನಡ ನಾಡಿದ ವಿಶೇಷ ಕಲಾ ಪರಂಪರೆಯನ್ನು ಇಡೀ ಜಗತ್ತಿಗೆ ಪರಿಚಯಿಸುತ್ತದೆ. ಮೈಸೂರು ಮಹಾರಾಜರು ನಾಡಿಗೆ ಸಾಕಷ್ಟು ಕೊಡುಗೆಯನ್ನು ಕೊಟ್ಟಿದ್ದಾರೆ. ದಸರಾ ಕ್ರೀಡಾ ಕೂಟದಲ್ಲಿ ವಿದ್ಯಾರ್ಥಿಯಾಗಿದ್ದಾಗ ಕಬ್ಬಡಿ ಆಟ ಆಡಲು ಭಾಗವಹಿಸಿದ್ದೆ ಎಂಬ ತಮ್ಮ ಹಳೆಯ ನೆನಪನ್ನು ಮಾಡಿಕೊಂಡರು.
ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ:
ಬಳ್ಳಾರಿ ಜಿಲ್ಲೆಯ ಲಕ್ಮೀಪುರ ಗ್ರಾಮದ ಹಿಂದೂಸ್ತಾನಿ ಶಾಸ್ರ್ರೀಯ ಕಲಾವಿದರಾದ ಪಂಡಿತ್ ಎಂ.ವೆಂಕಟೇಶ್ ಕುಮಾರ್ ಅವರಿಗೆ ದಸರಾ ಮಹೋತ್ಸವ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡುವ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡಿ, ಗೌರವ ಸಮರ್ಪಣೆ ಸಲ್ಲಿಸಲಾಯಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪಂಡಿತ್ ಎಂ.ವೆಂಕಟೇಶ್ ಕುಮಾರ್, ಕಣ್ಣಿಲ್ಲದವರಾಗಿ ಹುಟ್ಟಿ ಎಷ್ಟೋ ಮಕ್ಕಳಿಗೆ ಕಣ್ಣು ಕೊಟ್ಟ ಪುಟ್ಟರಾಜ ಗವಾಯಿಗಳು, ಅವರ ಆಶೀರ್ವಾದದಿಂದ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಲಭಿಸಿದೆ ಎಂದರು.
ಪುರಾಣ, ಕೀರ್ತನೆಗಳನ್ನು ಹಳ್ಳಿ ಹಳ್ಳಿಗಳಲ್ಲಿ ಹಾಡಿ ಬಂದ ದವಸ ಧಾನ್ಯ, ಹಣದಿಂದ ಜಾತಿ ನೋಡ ಬೇಡಿ ನೀತಿ ನೋಡಿ ಎಂಬಂತೆ ಎಲ್ಲಾ ಧರ್ಮದ ವಿದ್ಯಾರ್ಥಿಗಳಿಗೆ ವಿದ್ಯೆ ನೀಡಿ ಗವಾಯಿಗಳು ಸಲಹಿದರು ಎಂದರು.
ಅರಮನೆಯ ಒಳಾಂಗಣದಲ್ಲಿ 40 ವರ್ಷಗಳ ಹಿಂದೆ ಹಿಂದೆಯೂ ಹಾಡಿಕೊಂಡು ಬಂದ ಫಲವಾಗಿ ಈ ಪ್ರಶಸ್ತಿ ದೊರೆತಿದೆ. ತುಂಬಾ ಸಂತೋಷವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ, ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ ಎಂಬ ಕನಕದಾಸರ ಕೀರ್ತನೆಯನ್ನು ಹಾಡುವ ಮೂಲಕ ಗಣ್ಯರು ಹಾಗೂ ಪ್ರೇಕ್ಷಕರ ಮನಸ್ಸನ್ನು ಗೆದ್ದರು.
ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ, ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್.ಹೆಬ್ಬಾಳ್ಕರ್, ಚಾಮರಾಜ ನಗರ ಲೋಕಸಭಾ ಸದಸ್ಯರಾದ ಸುನೀಲ್ ಬೋಸ್, ಶಾಸಕರಾದ ತನ್ವೀರ್ ಸೇಠ್, ಎ.ಆರ್.ಕೃಷ್ಣಮೂರ್ತಿ,ರವಿಶಂಕರ್ ಡಿ, ಶ್ರೀವತ್ಸ, ಅನಿಲ್ ಚಿಕ್ಕಮಾಧು, ವಿಧಾನಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ,ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷರಾದ ಡಾ.ಪುಷ್ಪಾವತಿ ಅಮರನಾಥ್,ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಸ್.ಯುಕೇಶ್ ಕುಮಾರ್ ಸೇರಿದಂತೆ ಇತರರು ಇದ್ದರು.


