ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕಾರ್ಯ ಇನ್ನೂ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಅಕ್ಟೋಬರ್ 18ರವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ದಸರಾ ರಜೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಿಎಂ, ಸಮೀಕ್ಷೆಯಲ್ಲಿ 1.20 ಲಕ್ಷ ಶಿಕ್ಷಕರು ಭಾಗಿಯಾಗಿದ್ದಾರೆ. ಸಮೀಕ್ಷೆಯ ಪೂರ್ಣ ಕೆಲಸ ಆಗಬೇಕಾದರೆ ರಜೆ ವಿಸ್ತರಣೆ ಮಾಡಬೇಕು ಎಂದು ಶಿಕ್ಷಕರ ಸಂಘ ಮನವಿ ಮಾಡಿತ್ತು. ಹೀಗಾಗಿ ಎಲ್ಲಾ ಸರ್ಕಾರಿ, ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 18ರವರೆಗೆ ದಸರಾ ವಿಸ್ತರಣೆ ಮಾಡಲಾಗಿದೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ.
ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಮಧ್ಯಂತರ ಪರೀಕ್ಷೆ ನಡೆಯುತ್ತಿದೆ. ಹೀಗಾಗಿ ಪಿಯುಸಿ ಉಪನ್ಯಾಸಕರು ಸಮೀಕ್ಷೆಯಲ್ಲಿ ಭಾಗಯಾಗುವಂತಿಲ್ಲ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಮಾತ್ರ ರಜೆ ಘೊಷಣೆ ಮಾಡಲಾಗಿದೆ. ಸಮೀಕ್ಷೆಗೆ 12 ದಿನಗಳು ಸಿಗುತ್ತವೆ. ಅಕ್ಟೋಬರ್ 19ಗಿಂತ ಮೊದಲು ಸರ್ವೇಕಾರ್ಯ ಮುಗಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.


