ಮೈಸೂರು, ಆಗಸ್ಟ್ 10-ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಭಾಗವಹಿಸುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಯನ್ನು ಅರಮನೆಯ ಪೂರ್ವ ದಿಕ್ಕಿನಲ್ಲಿರುವ ಜಯಮಾರ್ತಾಂಡ ದ್ವಾರದಲ್ಲಿ ಇಳಿಸಂಜೆಯ ತಂಗಾಳಿಯ ಜೊತೆಗೆ ಮಳೆಯ ಸಿಂಚನದ ನಡುವೆ ಹೊಂಬಳಿಕಿನಿಂದ ಕಂಗೊಳಿಸುತ್ತಿದ್ದ ಅಂಬಾವಿಲಾಸ ಅರಮನೆಗೆ ಸ್ವಾಗತಿಸಿದರು.
ಈ ವೇಳೆಯಲ್ಲಿ ಪಶುಸಂಗೋಪನೆ ಸಚಿವರಾದ ಕೆ.ವೆಂಕಟೇಶ್ ಅವರು, ಶಾಸಕರಾದ ತನ್ವೀರ್ ಸೇಠ್, ಜಿ.ಟಿ.ದೇವೇಗೌಡ, ಶ್ರೀವತ್ಸ, ರಮೇಶ್ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯೂಬ್ ಖಾನ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಎಸ್.ಯುಕೇಶ್ ಕುಮಾರ್, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ, ಅಪರ ಜಿಲ್ಲಾಧಿಕಾರಿ ಡಾ ಪಿ. ಶಿವರಾಜು, ಡಿಸಿಪಿ ಸುಂದರ್ ರಾಜ್ ಸೇರಿದಂತೆ ಮುಂತಾದವರು ಹಾಜರಿದ್ದರು.


