ಬೆಂಗಳೂರು: ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಅರಣ್ಯ, ಪ್ರಾಣಿ ಸಂಪತ್ತನ್ನು ಲೂಟಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಶತಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯ ಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ ಮತ್ತು ಅರಣ್ಯ ಸಂರಕ್ಷಕರಿಗೆ ಪದಕ ವಿತರಣೆ ಮಾಡಿ ಅವರು ಮಾತನಾಡಿದರು.
ಸಾಕಿದ ಹಸುವನ್ನು ಹುಲಿ ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜು ನೋಡದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮಾನವ-ವನ್ಯಜೀವಿ ಸಹಬಾಳ್ವೆಯ ಪರಿಸರ ಪೂರಕವಾದ ಆಶಯಕ್ಕಾಗಿ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಗುತ್ತಿದೆ. ಅರಣ್ಯ ಪರಿಸರ ಆರೋಗ್ಯಕರವಾಗಿ ವಿಸ್ತರಣೆ ಆದಷ್ಟೂ ಮನುಷ್ಯ ಪರಿಸರ ಹೆಚ್ಚು ಆರೋಗ್ಯಕರವಾಗಿರುತ್ತದೆ. ಅರಣ್ಯದ ಉಳಿವು ಭೂಮಿಯ ಉಳಿವು ಎನ್ನುವುದನ್ನು ಮರೆಯಬಾರದು. ಆನೆ ಮತ್ತು ಹುಲಿ ಸಂಪತ್ತಿನಲ್ಲಿ ನಮ್ಮ ರಾಜ್ಯ ಮೊದಲ ಮತ್ತು ಎರಡನೇ ಸ್ಥಾನದಲ್ಲಿದೆ. ಇದರ ಜೊತೆಗೆ ಪ್ರಾಣಿ ಮತ್ತು ಮನುಷ್ಯರ ಸಂಘರ್ಷ ತಪ್ಪಿ ಸಹಬಾಳ್ವೆ ಏರ್ಪಡಬೇಕು. ಇದಕ್ಕಾಗಿ ಪ್ರಾಣಿಗಳು ಕಾಡು ಬಿಟ್ಟು ಹೊರಗೆ ಏಕೆ ಬರುತ್ತಿವೆ ಎನ್ನುವ ಬಗ್ಗೆ ಅಧ್ಯಯನಗಳು ನಡೆದು ವೈಜ್ಞಾನಿಕ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ ಎಂದು ತಿಳಿಸಿದರು.


